ಕರ್ನಾಟಕ ರಾಜ್ಯ ಪೌರ ನೌಕರರ ಸಂಘ (ರಿ.) ಇವರ ನೇತೃತ್ವದಲ್ಲಿ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ರಾಜ್ಯಾದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹೂಡಿರುವ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯ ಪೌರ ನೌಕರರು ಹಾಗೂ ಪೌರಕಾರ್ಮಿಕರು ಉಡುಪಿ ನಗರಸಭೆಯ ಮುಂಭಾಗದಲ್ಲಿ ಹೂಡಿರುವ ಮುಷ್ಕರದ ಸ್ಥಳಕ್ಕೆ ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ ಅವರು ಆಗಮಿಸಿ ಪೌರ ನೌಕರರಿಂದ ಮನವಿ ಸ್ವೀಕರಿಸಿ ತಕ್ಷಣವೇ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನು ದೂರವಾಣಿಯ ಮೂಲಕ ಸಂಪರ್ಕಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಪ್ರಮುಖ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವಂತೆ ತಿಳಿಸಿ ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖತಃ ಭೇಟಿಯಾಗಿ ಪೌರ ನೌಕರರ ಪ್ರಮುಖ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸುತ್ತೇನೆ ಎಂದು ಸ್ಥಳದಲ್ಲಿದ್ದ ಪೌರ ನೌಕರರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ವಿಪಕ್ಷ ನಾಯಕರಾದ ರಮೇಶ್ ಕಾಂಚನ್ ಅವರು ಮಾತನಾಡಿ ಸ್ಥಳೀಯಾಡಳಿತಕ್ಕೆ ಉತ್ತಮ ಹೆಸರು ಪಡೆಯಬೇಕೆಂದರೆ ಪೌರಕಾರ್ಮಿಕರು ಹಾಗೂ ಪೌರ ನೌಕರರು ಉತ್ತಮ ಕೆಲಸ ಮಾಡಿದರೆ ಮಾತ್ರ ಸಾಧ್ಯ. ಪೌರ ನೌಕರರ ಹಾಗೂ ಪೌರಕಾರ್ಮಿಕರ ನ್ಯಾಯಯುತ ಬೇಡಿಕೆ ಈಡೇರಿವಲ್ಲಿ ನಾವು ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ ಆಚಾರ್ಯ, ವಿಜಯ್ ಪೂಜಾರಿ, ಮಾಜಿ ನಗರಸಭಾ ಉಪಾಧ್ಯಕ್ಷರಾದ ಸಂಧ್ಯಾ ತಿಲಕ್ರಾಜ್, ಸತೀಶ್ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ, ಸಂಜಯ್ ಆಚಾರ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.