ಉಡುಪಿ: ಇಲ್ಲಿನ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾಗಿ ಇತಿಹಾಸ ವಿಭಾಗದ ಮುಖ್ಯಸ್ಥ, ಸಹ ಪ್ರಾಧ್ಯಾಪಕ ಡಾ.ಚಂದ್ರಕಾಂತ್ ಭಟ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಸುದೀರ್ಘ ಅನುಭವ ಹೊಂದಿರುವ ಇವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಎಂಫಿಲ್ ಪದವಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ಇವರು ಸಂಶೋಧನಾ ವಲಯದಲ್ಲಿಯೂ ಗುರುತರವಾದ ಸಾಧನೆಯನ್ನು ಮಾಡಿದ್ದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದಾರೆ. ಇವರ ಸಂಶೋಧನಾ ಬರಹಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
2008 ರಿಂದ 2013 ರವರೆಗೆ ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2013 ರಿಂದ 2016 ರವರೆಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2016 ರಿಂದ 2018 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿಶೇಷ ಅಧಿಕಾರಿಯಾಗಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಿ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ಇವರು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನವನ್ನೂ ನೀಡುತ್ತಿದ್ದಾರೆ.