ಕುಂದಾಪುರ : ಸರ್ಕಾರಿ ಬಸ್-ಟಿಪ್ಪರ್ ನಡುವೆ ಭೀಕರ ಅಪಘಾತ; ಮೂವರು ವಿದ್ಯಾರ್ಥಿಗಳು ಗಂಭೀರ!

ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.

ಕುಂದಾಪುರದಿಂದ ಆಜ್ರಿ-ಸಿದ್ದಾಪುರ ಕಡೆಗೆ ಸಾಗುತ್ತಿದ್ದ ಸರ್ಕಾರಿ ಬಸ್ ಗೆ ನೇರಳಕಟ್ಟೆಯಿಂದ ಮಣ್ಣು ತುಂಬಿಸಿಕೊಂಡು ತಲ್ಲೂರಿನತ್ತ ಸಾಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ.

ಬಸ್ ನ ಬಲ ಬದಿಗೆ ಢಿಕ್ಕಿ ಹೊಡೆದಿದ್ದರಿಂದ ಚಾಲಕನ ಬದಿಯ ಒಂದು ಪಾರ್ಶ್ವ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿವೆ.

ಸಂಜೆ ಸಮಯವಾದ್ದರಿಂದ ಬಸ್ ನಲ್ಲಿ ಬಹುತೇಕ ಕಾಲೇಜು ವಿದ್ಯಾರ್ಥಿಗಳಿದ್ದು, ಕಿಟಿಕಿ ಬದಿಯಲ್ಲಿ ಕೂತವರೆಲ್ಲರಿಗೂ ಗಂಭೀರ ಗಾಯಗಳಾಗಿದೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿರುತ್ತಾರೆ.

ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು