ಸಿಎಂ ಸ್ಥಾನಕ್ಕೆ ಸಿದ್ದು ರಾಜೀನಾಮೆ!

ಕಾಂಗ್ರೆಸ್‌ ಹೈಕಮಾಂಡ್‌ ನಿರ್ದೇಶನದಂತೆ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಗುರುವಾರ (ಮೇ 28) ಮಧ್ಯಾಹ್ನ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಯಾದ ಪ್ರಭುಶಂಕರ್‌ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೇರಿದಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಜತೆಗಿದ್ದರು.

ಆದರೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ರಾತ್ರಿ 7-30ಕ್ಕೆ ಲೋಕಭವನಕ್ಕೆ ವಾಪಸ್ಸಾದ ನಂತರ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಅಂಗೀಕರಿಸಲಿದ್ದಾರೆ ಎಂದು ಲೋಕಭವನದ ಮೂಲಗಳು ತಿಳಿಸಿವೆ.

ಕಳೆದ ಆರು ತಿಂಗಳಿನಿಂದ ರಾಜ್ಯ ಕಾಂಗ್ರೆಸ್‌ ನಲ್ಲಿ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಂಗಳವಾರ ಕಾಂಗ್ರೆಸ್‌ ಹೈಕಮಾಂಡ್‌ ಸತತ ಆರು ಗಂಟೆಗಳ ಕಾಲ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಅಧಿಕಾರ ಸೂತ್ರ ಹಂಚಿಕೆ ಒಪ್ಪಂದದ ಪ್ರಕಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಸೂಚಿಸಲಾಗಿತ್ತು.


ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯನವರು ಕಾವೇರಿ ನಿವಾಸದಲ್ಲಿ ಆಯೋಜಿಸಿದ್ದ ಉಪಹಾರ ಕೂಟದಲ್ಲಿ, ತಾನು ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ ನೀಡುವುದಾಗಿ ಸಚಿವರಿಗೆ ಮನವರಿಕೆ ಮಾಡಿದ್ದರು. ಅಲ್ಲದೇ ಡಿಕೆಶಿ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ, ಅವರಿಗೆ ಎಲ್ಲರೂ ಸಹಕಾರ ನೀಡಿ ಎಂದು ತಿಳಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು