ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಿಸುವುದಾಗಿ ನಂಬಿಸಿ ₹70 ಲಕ್ಷ ಪಡೆದು ವಂಚನೆ ಎಸಗಿದಲ್ಲದೆ, ಅಶ್ಲೀಲ ವಿಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್ಮೇಲ್ ನಡೆಸಿದ ಹಾಗೂ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಝೀನತ್ ಇಬ್ರಾಹಿಂ ಎಂದು ಗುರುತಿಸಲಾಗಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಆಕೆಯನ್ನು ಬಂಧಿಸಿದೆ.
ಉಡುಪಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನೀಡಿದ ದೂರಿನ ಪ್ರಕಾರ, ಆರೋಪಿತೆ ಝೀನತ್ ಇಬ್ರಾಹಿಂ ಅವರ ಪರಿಚಯವಾದ ಬಳಿಕ ಇಬ್ಬರೂ ಸೇರಿ ಉಡುಪಿಯಲ್ಲಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಆರಂಭಿಸಿದ್ದರು. ಜಮೀನು ಖರೀದಿಗೆ ಹೂಡಿಕೆ ಮಾಡುವುದಾಗಿ ನಂಬಿಸಿ ಆರೋಪಿತೆ ದೂರುದಾರರಿಂದ ₹70 ಲಕ್ಷ ಹಣ ಪಡೆದಿದ್ದಳು. ಆದರೆ, ಆ ಹಣವನ್ನು ಜಮೀನು ಖರೀದಿಗೆ ಬಳಸದೆ ತನ್ನ ವೈಯಕ್ತಿಕ ಉದ್ದೇಶಗಳಿಗೆ ಬಳಸಿಕೊಂಡು ವಂಚನೆ ಎಸಗಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ದೂರುದಾರರು ತಮ್ಮ ಕಚೇರಿಯನ್ನು ಮುಚ್ಚುವ ವೇಳೆ ಅಲ್ಲಿದ್ದ ಕೆಲವು ರಹಸ್ಯ ಕಡತಗಳು ಹಾಗೂ ಪೆನ್ಡ್ರೈವ್ಗಳು ಪತ್ತೆಯಾಗಿದ್ದು, ಅವುಗಳಲ್ಲಿ ಹಲವು ಪ್ರಭಾವಿ ವ್ಯಕ್ತಿಗಳ ಖಾಸಗಿ ಹಾಗೂ ಅಶ್ಲೀಲ ಛಾಯಾಚಿತ್ರಗಳು ಮತ್ತು ವಿಡಿಯೋಗಳು ಸಂಗ್ರಹವಾಗಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ತಾನು ನೀಡಿದ್ದ ₹70 ಲಕ್ಷ ಹಣವನ್ನು ವಾಪಸ್ ನೀಡುವಂತೆ ಕೇಳಿದಾಗ ಆರೋಪಿತೆ ದೂರುದಾರರ ಹೊಸ ಕಚೇರಿಗೆ ಬಂದು ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಹಣ ನೀಡದಿದ್ದರೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ತನ್ನ ಬಳಿ ದೂರುದಾರರ ಅಶ್ಲೀಲ ವಿಡಿಯೋಗಳಿವೆ ಎಂದು ಹೇಳಿ ನಿರಂತರವಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಅಲ್ಲದೆ, ದೂರುದಾರರ ಪತ್ನಿ ಹಾಗೂ ಮಕ್ಕಳನ್ನು ಅಪಹರಿಸಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ.
ಇದೇ ಪ್ರಕರಣದಲ್ಲಿ ಸಬೀನಾ ಇಲಿಯಾಸ್ ಹಾಗೂ ಇತರರು ಆರೋಪಿತೆಯೊಂದಿಗೆ ಸೇರಿ ಬ್ಲ್ಯಾಕ್ಮೇಲ್ ಮೂಲಕ ಅಕ್ರಮವಾಗಿ ಹಣ ವಸೂಲಿ ನಡೆಸುತ್ತಿದ್ದು, ಸಂಘಟಿತ ವಂಚನಾ ಜಾಲವನ್ನೇ ನಡೆಸುತ್ತಿರುವ ಶಂಕೆಯೂ ವ್ಯಕ್ತವಾಗಿದೆ.
ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಪ್ರಕರಣದ ತನಿಖೆಗಾಗಿ ಪಿಎಸ್ಐ (ಕಾನೂನು ಮತ್ತು ಸುವ್ಯವಸ್ಥೆ) ಭರತೇಶ್ ಕಂಕಣವಾಡಿ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಂಡವು ಜುಲೈ 2ರಂದು ಪಡುಬಿದ್ರೆ ಸಮೀಪದ ಕಂಚಿನಡ್ಕದಲ್ಲಿ ಆರೋಪಿತೆ ಝೀನತ್ (ಇಬ್ರಾಹಿಂ ಅವರ ಪುತ್ರಿ ಹಾಗೂ ಅಬ್ದಲ್ ಸಲಾಂ ಅವರ ಪತ್ನಿ) ಅವರನ್ನು ಬಂಧಿಸಿದೆ. ಆರೋಪಿತೆ ಕಂಚಿನಡ್ಕ ಮಸೀದಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಆರೋಪಿತೆಯಿಂದ ಇದೇ ರೀತಿಯ ಮೋಸ ಅಥವಾ ವಂಚನೆಗೆ ಒಳಗಾಗಿರುವ ಸಾರ್ವಜನಿಕರು ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

0 ಕಾಮೆಂಟ್ಗಳು