ಉಡುಪಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರು ಈ ಹಿಂದೆ ಬಿಜೆಪಿ ಪಾರ್ಟಿಯ ಹೋರಾಟದ ಫಲವಾಗಿ ರಾಜೀನಾಮೆ ನೀಡಿದ್ದರು. ಇದೀಗ ಅವರ ವಿರುದ್ಧದ ತನಿಖೆ ಪೂರ್ಣಗೊಂಡು ಯಾವುದೇ ಕ್ಲೀನ್ಚಿಟ್ ಸಿಗದಿದ್ದರೂ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ರಾಜ್ಯ ಸರ್ಕಾರ ಕರ್ನಾಟಕ ನಾಡಿನ ಜನತೆಗೆ ಹಾಗೂ ವಾಲ್ಮೀಕಿ ಜನಾಂಗಕ್ಕೆ ಮಾಡಿರುವ ದ್ರೋಹ.
ನಿಗಮ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನೇ ಮತ್ತೆ ಸಚಿವರನ್ನಾಗಿ ಮಾಡಿರುವುದು, ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಹಣ ತೆಗೆಯಲಾಗಿದೆ ಎಂಬ ಆರೋಪಗಳಿದ್ದು, ಇದನ್ನು ಅಂದಿನ ಮುಖ್ಯಮಂತ್ರಿಗಳು ಕೂಡ ಸದನದಲ್ಲಿಯೇ ಒಪ್ಪಿಕೊಂಡಿದ್ದರು ಎನ್ನುವುದು ಕಠೋರ ಸತ್ಯ, ಈ ಕುರಿತು ತನಿಖಾ ಸಂಸ್ಥೆಗಳ ದಾಖಲೆಗಳಲ್ಲಿಯೂ ಉಲ್ಲೇಖಗಳಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಯೂ ಅತ್ಯಂತ ಗಂಭೀರ ವಿಚಾರವಾಗಿದೆ.
ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡುವ ಅಗತ್ಯ ಈಗಿನ ಮುಖ್ಯಮಂತ್ರಿ ಅವರಿಗೆ ಏನಿತ್ತು? ಅವರ ವಿರುದ್ಧದ ಆರೋಪಗಳು ಮತ್ತು ತನಿಖೆ ಮುಂದುವರಿದಿರುವ ಸಂದರ್ಭದಲ್ಲಿ ಅವರನ್ನು ಸಂಪುಟಕ್ಕೆ ಸೇರಿಸಲು ಮುಖ್ಯಮಂತ್ರಿಗಳ ಮೇಲೆ ಯಾರ ಒತ್ತಡವಿತ್ತು ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಹೈಕಮಾಂಡ್ನ ಒತ್ತಡವಿತ್ತೇ ಅಥವಾ ಬೇರೆ ಯಾವುದೇ ಕಾರಣವಿತ್ತೇ ಎಂಬುದನ್ನು ಜನತೆಗೆ ತಿಳಿಸಬೇಕು.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ. ಅಗತ್ಯವಿದ್ದರೆ ಅವರದೇ ಸಮುದಾಯದ ಅರ್ಹ ವ್ಯಕ್ತಿಯನ್ನು ಸಚಿವರನ್ನಾಗಿ ನೇಮಿಸಲಿ. ಆದರೆ ತನಿಖೆ ಎದುರಿಸುತ್ತಿರುವ ವ್ಯಕ್ತಿಗೆ ಸಚಿವ ಸ್ಥಾನ ನೀಡುವ ಮೂಲಕ ಸರ್ಕಾರ ಜನರ ವಿಶ್ವಾಸಕ್ಕೆ ಧಕ್ಕೆ ತಂದಿದೆ.
ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ಹಾಗೂ ಜೆಡಿಎಸ್ ಹೋರಾಟ ಮುಂದುವರಿಸಲಿವೆ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ಹಾಗೂ ಮನವಿಪತ್ರ ಸಲ್ಲಿಸುವ ಮೂಲಕ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣ ನಾಗೇಂದ್ರ ಅವರ ರಾಜೀನಾಮೆ ಪಡೆದು, ಪರಿಶಿಷ್ಟ ಪಂಗಡದ ಜನತೆಗೆ ನ್ಯಾಯ ಒದಗಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ.
