ಉಡುಪಿ : ಇಂದು ತಂತ್ರಜ್ಞಾನ ನಮ್ಮ ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಈ ಸಂದರ್ಭದಲ್ಲಿ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿ ಬಳಸಿಕೊಳ್ಳಲು ಉತ್ತಮ ತರಬೇತಿಗಳ ಅಗತ್ಯವಿದೆ. ತರಬೇತಿಯ ಮೂಲಕ ರೆಡ್ ಕ್ರಾಸ್ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡಲು ಸಾಧ್ಯ ಎಂದು ರಾಜ್ಯ ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿಯವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್ ಕ್ರಾಸ್ ನ ಹೆನ್ರಿ ಡ್ಯುನಾಂಟ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪದವಿ ಕಾಲೇಜುಗಳ ರೆಡ್ ಕ್ರಾಸ್ ಅಧಿಕಾರಿಗಳ ಒಂದು ದಿನದ ತರಬೇತಿಯನ್ನು ಉದ್ಗಾಟಿಸಿ ಮಾತಾನಾಡಿದರು. ಜಿಲ್ಲಾ ರೆಡ್ ಕ್ರಾಸ್ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಅಧ್ಯಕ್ಷತೆ ವಹಿಸಿ ರೆಡ್ ಕ್ರಾಸ್ ವತಿಯಿಂದ ಹಲವು ರೀತಿಯ ತರಬೇತಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.
ರೆಡ್ ಕ್ರಾಸ್ ಅಧಿಕಾರಿ ಎಂ. ಎಸ್ ದಿವ್ಯ ಪ್ರಾರ್ಥಿಸಿದರು. ರೆಡ್ ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ರೆಡ್ ಕ್ರಾಸ್ ಕಾರ್ಯಕ್ರಮಗಳ ವಿವರ ನೀಡಿದರು. ಕುಂದಾಪುರ ರೆಡ್ ಕ್ರಾಸ್ ಘಟಕದ ಸಭಾಪತಿ ಜಯಕರ ಶೆಟ್ಟಿ ಎಸ್. ಖಜಾಂಚಿ ಶಿವರಾಮ ಶೆಟ್ಟಿ ಜಿಲ್ಲಾ ಖಜಾಂಚಿ ರಮಾದೇವಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್ ಟಿ. ವಂದಿಸಿದರು. ರೆಡ್ ಕ್ರಾಸ್ ಸದಸ್ಯರಾದ ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕಳೆದ ವರ್ಷದ ಜಿನೇವಾ ಒಪ್ಪಂದ ಜಾಥಾ ಮತ್ತು ನಿಧಿ ಸಂಗ್ರಹಣೆಯಲ್ಲಿ ಪ್ರಥಮ ಬಹುಮಾನ ಪಡೆದ ಪೂರ್ಣ ಪ್ರಜ್ಞಾ ಕಾಲೇಜು, ದ್ವಿತೀಯ ಬಹುಮಾನ ಪಡೆದ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಮತ್ತು ತೃತೀಯ ಬಹುಮಾನ ಪಡೆದ ಸೈಂಟ್ ಮೇರಿಸ್ ಕಾಲೇಜು ಶಿರ್ವ ಇದರ ಅಧಿಕಾರಿಗಳು ಘಟಕ ನಾಯಕರೊಂದಿಗೆ ಬಹುಮಾನ ಸ್ವೀಕರಿಸಿದರು.
