ಉಡುಪಿ: ಮಣಿಪಾಲ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ಬ್ರಿಡ್ಜ್ ಬಳಿ ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಸೆ.16ರಂದು ಸಂಜೆ 7 ಗಂಟೆ ಸುಮಾರಿಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಅಗತ್ಯ ಅಧಿಕಾರ ಪತ್ರ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದರು.
ಸೆ.17ರಂದು ರಾತ್ರಿ 12.10ರ ಸುಮಾರಿಗೆ ಅಂಬಾಗಿಲು ಕಡೆಯಿಂದ ಪೆರಂಪಳ್ಳಿ ಕಡೆಗೆ ಬರುತ್ತಿದ್ದ KA-19-MK-2021 ನೋಂದಣಿಯ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು ಪೆರಂಪಳ್ಳಿ ಬ್ರಿಡ್ಜ್ ಬಳಿ ತಡೆದು ಪರಿಶೀಲಿಸಲಾಯಿತು.
ಕಾರಿನಲ್ಲಿದ್ದ ಅಕ್ಬರ್ ಮಹಮ್ಮದ್ ಬ್ಯಾರಿ (44), ಕೋಟೆ, ಕಟಪಾಡಿ, ಉದ್ಯಾವರ ಹಾಗೂ ಸೈಯದ್ ಸುಹೇಲ್ (26), ಬೆಂಗಳೂರು ಎಂಬವರನ್ನು ಬಂಧಿಸಲಾಗಿದೆ.
ಆರೋಪಿತರಿಂದ ಸುಮಾರು 1 ಲಕ್ಷ ರೂ. ಮೌಲ್ಯದ 30 ಗ್ರಾಂ ಎಂಡಿಎಂಎ ಮಾದಕ ವಸ್ತು, 40 ಸಾವಿರ ರೂ. ಮೌಲ್ಯದ ನಾಲ್ಕು ಮೊಬೈಲ್ ಫೋನ್ಗಳು, 5 ಸಾವಿರ ರೂ. ಮೌಲ್ಯದ ಒಂದು ಡಾಂಗಲ್, 9,500 ರೂ. ನಗದು ಹಣ ಹಾಗೂ ಮಾದಕ ವಸ್ತು ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ಸುಮಾರು 3 ಲಕ್ಷ ರೂ. ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿತರು ಎಂಡಿಎಂಎ ಮಾದಕ ವಸ್ತುವನ್ನು ಬೆಂಗಳೂರಿನಿಂದ ತಂದು ಉಡುಪಿ, ಪೆರಂಪಳ್ಳಿ ಹಾಗೂ ಮಣಿಪಾಲ ಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 155/2026, ಕಲಂ 8(ಸಿ), 22(ಸಿ) ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ಪ್ರವೀಣ್ ಶೆಟ್ಟಿಗಾರ್, ರಾಜೇಶ್ ಹೆರ್ಗ, ವಿಶ್ವಜಿತ್, ಸುಕುಮಾರ್ ಶೆಟ್ಟಿ, ವಿದ್ಯಾ ನಾಯಕ್, ದೀಕ್ಷಿತ್, ಉಮೇಶ್, ಲಕ್ಷ್ಮೀಶ ಹಾಗೂ ಸಲೀಂ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಕರಣದ ತನಿಖೆಯನ್ನು ಪಿಎಸ್ಐ ತಿಮ್ಮೇಶ್ ಬಿ.ಎನ್. ಅವರು ಕೈಗೊಂಡಿದ್ದು, ಬಂಧಿತ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
